Chitradurga news|Nammajana.con|16-8-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದ ರಸ್ತೆ ಅಗಲೀಕರಣ ಮಾಡುವುದಕ್ಕೆ ನಾವೆಲ್ಲರೂ ಬದ್ದವಾಗಿದ್ದೇವೆ ಎಂದು ಸಚಿವ ಡಿ.ಸುಧಾಕರ್ ಖಡಕ್ ಆಗಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅಧಿಕಾರಿಗಳೊಂದಿಗಿನ ಪ್ರಮುಖ ವಿವಿಧ ವಿಷಯಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿತ್ರದುರ್ಗ ನಗರದ ಪ್ರಮುಖ ರಸ್ತೆಯನ್ನು ಎರಡು ಹಂತಗಳಲ್ಲಿ ಅಗಲೀಕರಣಗೊಳಿಸುವ ಕಾರ್ಯದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು, ರಸ್ತೆ ಅಗಲೀಕರಣಕ್ಕಾಗಿ ಕೈಗೊಳ್ಳಲಾಗಿರುವ ಸಿದ್ಧತೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಎರಡು ಹಂತದಲ್ಲಿ ರಸ್ತೆ ಅಗಲೀಕರಣ
ಪ್ರವಾಸಿ ಮಂದಿರ ವೃತ್ತದಿಂದ ಗಾಂಧಿ ವೃತ್ತದವರೆಗೆ ಮೊದಲ ಹಂತ ಹಾಗೂ ಗಾಂಧಿ ವೃತ್ತದಿಂದ ಕನಕ ವೃತ್ತದವರೆಗೆ ಎರಡನೆ ಹಂತದಲ್ಲಿ ರಸ್ತೆಯ ಮಧ್ಯ ಭಾಗದಿಂದ ಕನಿಷ್ಟ 25 ಮೀ. ರಸ್ತೆ ಅಗಲೀಕರಣ ಮಾಡಲು ಉದ್ದೇಶಿಸಲಾಗಿದೆ.
400 ಕ್ಕೂ ಹೆಚ್ಚು ಆಸ್ತಿಗಳು ರಸ್ತೆ ಅಗಲೀಕರಣಕ್ಕಾಗಿ ತೆರವು
ಈ ಭಾಗದಲ್ಲಿ ಬರುವ ಅಂದಾಜು 400 ಕ್ಕೂ ಹೆಚ್ಚು
ಆಸ್ತಿಗಳು ಹಾಗೂ ಇತರೆ ಆಸ್ತಿಗಳ ಪ್ರತಿಯೊಂದು ಕಡತವನ್ನು ಸಿದ್ಧಪಡಿಸಲಾಗಿದೆ.
ಈ ಪೈಕಿ ರಸ್ತೆ ಒತ್ತುವರಿ ಮಾಡಿಕೊಂಡಿರುವ ಕಟ್ಟಡಗಳು, ಟ್ರೇಡ್ ಲೈಸೆನ್ಸ್ ಉಲ್ಲಂಘನೆ ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ನಿಯಮಗಳ ಉಲ್ಲಂಘನೆ ಮಾಡಿರುವ ಕಟ್ಟಡಗಳನ್ನು ಗುರುತಿಸಿ, ಅಂತಹವುಗಳನ್ನು ತ್ವರಿತವಾಗಿ ತೆರವುಗೊಳಿಸಿ, ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ನಗರದ ರಸ್ತೆ ಅಗಲೀಕರಣ
ನಗರದಲ್ಲಿ ಸಂಚಾರ ದಟ್ಟಣೆ, ವಾಹನಗಳ ಓಡಾಟಕ್ಕೆ ಇರುವ ಸಮಸ್ಯೆ, ಫುಟ್ಪಾತ್, ಒಳಚರಂಡಿ ವ್ಯವಸ್ಥೆ, ಪಾರ್ಕಿಂಗ್ ಮುಂತಾದ ಸಮಸ್ಯೆಗಳು ಇಲ್ಲಿನ ಪ್ರಮುಖ ರಸ್ತೆಯಲ್ಲಿ ಇದ್ದು, ನಗರದ ಅಭಿವೃದ್ಧಿಯ ದೃಷ್ಟಿಯಿಂದ ರಸ್ತೆ ಅಗಲೀಕರಣ ಆಗಲೇಬೇಕು ಎಂದು ಸಚಿವರು ಸೂಚನೆ ನೀಡಿದರು.
ರಸ್ತೆ ಅಗಲೀಕರಣಕ್ಕೆ ಶಾಸಕರ, ವಿಧಾನ ಪರಿಷತ್ ಸದಸ್ಯರ ಬೆಂಬಲ
ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರು ಪಾಲ್ಗೊಂಡು, ಡಿಸಿ ಆಫೀಸ್ ಕಟ್ಟಡಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರ, ನಗರದ ರಸ್ತೆ ಅಗಲೀಕರಣ, ಹೊಸದಾಗಿ ಡಿ.ಸಿ. ಆಫೀಸ್ ನಿರ್ಮಾಣ ವಿಚಾರವಾಗಿ ಹಲವು ಸಲಹೆ ಸೂಚನೆಗಳನ್ನು ನೀಡಿ, ಜಿಲ್ಲಾ ಉಸ್ತುವಾರಿ ಸಚಿವರು ಕೈಗೊಂಡಿರುವ ನಿರ್ಧಾರಗಳು ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಉತ್ತಮವಾಗಿವೆ.ಹೀಗಾಗಿ ಇದನ್ನು ಕಾರ್ಯಗತಗೊಳಿಸಲು ಬೆಂಬಲ ನೀಡುವುದಾಗಿ ಹೇಳಿದರು.
ಇದನ್ನೂ ಓದಿ: Independence Day: ಸರ್ಕಾರಿ ನೌಕರರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಡಾ. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಂಜಿತ್ ಕುಮಾರ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಡಿಯುಡಿಸಿ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್, ನಗರಸಭೆ ಪೌರಾಯುಕ್ತೆ ರೇಣುಕಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
